ಕಲಬುರಗಿ ಜು.23:- ಕೃಷಿ ಇಲಾಖೆ ನೇಮಕಾತಿಯಲ್ಲಿ ಸಿ & ಆರ್ (ವೃಂದ ಮತ್ತು ನೇಮಕಾತಿ) ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಕಲಬುರಗಿ ಕೃಷಿ ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
ಕೃಷಿ ಇಲಾಖೆ ನೇಮಕಾತಿಯಲ್ಲಿ ಬಿಇ ಬಯೋಟೆಕ್ ಹಾಗೂ ಐಸಿಎಆರ್ (ICAR) ಮಾನ್ಯತೆ ಇಲ್ಲದ ಖಾಸಗಿ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಇದು ಸಿ & ಆರ್ (ವೃಂದ ಮತ್ತು ನೇಮಕಾತಿ) ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಪ್ರತಿಭಟನೆ ನಿರತ ಕೃಷಿ ವಿವಿ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ಕಲಬುರಗಿಯ ಕೃಷಿ ವಿವಿ ಎದುರುಗಡೆ ವಿದ್ಯಾರ್ಥಿಗಳು ಕಳೆದ ಮೂರು ದಿನಗಳಿಂದ ಪ್ರತಿಭಟನಾ ಧರಣಿ ನಡೆಸುತ್ತಿದ್ದಾರೆ.
ಕೃಷಿ ಅಧಿಕಾರಿ (AO) ಹಾಗೂ ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಕೈಗೊಂಡಿರುವ ಕ್ರಮವನ್ನು ಖಂಡಿಸಿದ ವಿದ್ಯಾರ್ಥಿಗಳು, ಮೂಲ ಸಿ&ಆರ್ ನಿಯಮಗಳನ್ನು ಉಲ್ಲಂಘಿಸಿ ಅರ್ಹತೆಯ ಮಾನದಂಡಗಳಲ್ಲಿ ಬದಲಾವಣೆ ಮಾಡಿರುವುದು ಕಾನೂನುಬಾಹಿರ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೃಷಿ ಪದವೀಧರರ ಹಕ್ಕುಗಳನ್ನು ಕಡೆಗಣಿಸಲಾಗುತ್ತಿದ್ದು, ಅವೈಜ್ಞಾನಿಕ ‘ದೇಸಿ ಪ್ರೋಗ್ರಾಂ’ ಜಾರಿಯಿಂದ ರೈತರು ಕೂಡ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ ಎಂದು ಆರೋಪಿಸಿದರು. ಕೃಷಿ ಇಲಾಖೆಯ ನೇಮಕಾತಿಯಲ್ಲಿ ಕೃಷಿ ಪದವಿ ಪಡೆದ ವಿದ್ಯಾರ್ಥಿಗಳಿಗೆ ಮಾತ್ರ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.
ಕರ್ನಾಟಕ ಸರಕಾರ ಕೃಷಿ ಸಚಿವರನ್ನು ನೇಮಿಸದೆ ನೇಮಕಾತಿ ಮಾಡುತ್ತಿರುವುದು ಹಲವು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ ಎಂದೂ ಸಹ ಪ್ರತಿಭಟನೆ ನಿರತ ವಿದ್ಯಾರ್ಥಿಗಳು ಕಿಡಿಕಾರಿದರು. ಪ್ರತಿಭಟನೆಯಲ್ಲಿ ಕಲಬುರಗಿ ಕೃಷಿ ವಿಶ್ವ ವಿದ್ಯಾಲಯದ ನೂರಾರು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದಾರೆ. ನಮ್ಮ ಬೇಡಿಕೆ ಈಡೇರುವವರೆಗೆ ಧರಣಿ ಕೈ ಬಿಡುವುದಿಲ್ಲ.
ಜಾಹೀರಾತಿಗಾಗಿ ನಮ್ಮನ್ನು ಸಂಪರ್ಕಿಸಬಹುದು





